ಮೌಂಟೇನ್ ವ್ಯೂ ಕಾಲೇಜು ವಿದ್ಯಾರ್ಥಿಗಳ ಮೇಲೆ ಹೇಜ್ಜೇನು ದಾಳಿ
* ಹೆಜ್ಜೇನು ಗೂಡಿಗೆ ಕಲ್ಲು ಹೊಡೆದಿದ್ದ ವಿದ್ಯಾರ್ಥಿ,ಓರ್ವನ ಸ್ಥಿತಿ ಗಂಭೀರ
* ಮೌಂಟೆನ್ ವ್ಯೂ ಕಾಲೇಜಿನಲ್ಲಿ ಘಟನೆ
NAMMMUR EXPRESS NEWS
ಚಿಕ್ಕಮಗಳೂರು : ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳ ಮೇಲೆ
ಹೆಜ್ಜೇನುಗಳು ದಾಳಿ ನಡೆಸಿದ ಪರಿಣಾಮ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುರುವಾರ ನಗರದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹಾಸನ ನಗರದ ಆಸ್ಪತ್ರೆಗೆ ರವಾನಿಸಲಾಗಿದೆ.
ನಗರದ ಮೌಂಟೇನ್ ವ್ಯೂ ಕಾಲೇಜಿನಲ್ಲಿ ಘಟನೆ ನಡೆದಿದ್ದು, ಮಧ್ಯಾಹ್ನ ವಿದ್ಯಾರ್ಥಿಗಳನ್ನು ಊಟಕ್ಕೆ ಬಿಟ್ಟ ವೇಳೆ ಜೇನುಗೂಡಿಗೆ ವಿದ್ಯಾರ್ಥಿಯೊಬ್ಬ ಕಲ್ಲು ಹೊಡೆದ ಪರಿಣಾಮ ಹೆಜ್ಜೇನು ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿವೆ ಎಂದು ತಿಳಿದು ಬಂದಿದೆ.
ಹೆಜ್ಜೇನು ದಾಳಿಯಿಂದ ಅಸ್ವಸ್ಥರಾದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಆಸ್ಪತ್ರೆಗೆ ರವಾನಿಸಲಾಗಿದೆ.
ಕಾಲೇಜು ವಿದ್ಯಾರ್ಥಿಗಳಿಗೆ ಹೆಜ್ಜೇನು ದಾಳಿ ನಡೆಸಿವೆ ಎಂಬ ವಿಚಾರ ತಿಳಿಯುತ್ತಿದ್ದಂತೆ ವಿದ್ಯಾರ್ಥಿಗಳ ಪೋಷಕರು ಆಸ್ಪತ್ರೆಗೆ ದೌಡಾಯಿಸಿದ್ದಾರೆ.







