ಕುಂದಾಪುರ: ಕಾರ್ಮಿಕರ ಸ್ಮಾರ್ಟ್ ಕಾರ್ಡ್ ಭಾಗ್ಯ!
– ಉಷಾ ಗ್ರಾಂಡ್ ಹೋಟೆಲ್ ಎದುರು ನಡೆದ ಸ್ಮಾರ್ಟ್ ಕಾರ್ಡ್ ನೋಂದಣಿ ಹಾಗೂ ವಿತರಣೆ ಕಾರ್ಯಕ್ರಮ ಯಶಸ್ವಿ
– ಆಯೋಜನೆಗೆ ಹೋಟೆಲ್ ಕಾರ್ಮಿಕರಿಂದ ಮೆಚ್ಚುಗೆ
NAMMUR EXPRESS NEWS
ಕುಂದಾಪುರ: ಕುಂದಾಪುರದ ಉಷಾ ಗ್ರಾಂಡ್ ಹೋಟೆಲ್ ಎದುರು, ಕರ್ನಾಟಕ ಹೋಟೆಲ್ ಕಾರ್ಮಿಕರ ಸಂಘ ಮತ್ತು ಉಡುಪಿ ಜಿಲ್ಲಾ ಕಾರ್ಮಿಕ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ, ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ಅಡಿ ಹೋಟೆಲ್ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ನೋಂದಣಿ ಹಾಗೂ ವಿತರಣೆ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ಸುಮಾರು ಇನ್ನೂರಕ್ಕಿಂತ ಹೆಚ್ಚು ಹೋಟೆಲ್ ಕಾರ್ಮಿಕರು ಭಾಗವಹಿಸಿ, ತಮ್ಮ ಸ್ಮಾರ್ಟ್ ಕಾರ್ಡ್ ನೋಂದಣಿ ಪೂರ್ಣಗೊಳಿಸಿದರು. ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆದ ಈ ಶಿಬಿರದಲ್ಲಿ, ಪರಿಸರದ ಅನೇಕ ಹೋಟೆಲ್ಗಳ ಕಾರ್ಮಿಕರು ಬಂದು ಯೋಜನೆಯಿಂದ ಪ್ರಯೋಜನ ಪಡೆದರು.
ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಕಾರ್ಮಿಕ ಇಲಾಖೆಯ ಆಯುಕ್ತರು ಹಾಗೂ ಇಲಾಖೆಯ ಸಿಬ್ಬಂದಿಗಳು ಸಕ್ರಿಯವಾಗಿ ಪಾಲ್ಗೊಂಡು ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಹೋಟೆಲ್ ಕಾರ್ಮಿಕರ ಸಂಘದ ರಾಜ್ಯ ಉಪಾಧ್ಯಕ್ಷರಾದ ಸುಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಅಧ್ಯಕ್ಷರಾದ ನಾಗರಾಜ್ ಶೆಟ್ಟಿ ಗಂಟೆಹೊಳೆ, ಹಾಗೂ ಸಂಘದ ಪದಾಧಿಕಾರಿಗಳಾದ ಪುರುಷೋತ್ತಮ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಲು ಸಹಕರಿಸಿದರು.
ಈ ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಹೋಟೆಲ್ ಕಾರ್ಮಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.








